ಹೆಬ್ರಿ : ಹೆಬ್ರಿ ಎಸ್.ಆರ್. ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸೋಮವಾರ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯ ” ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿನ ಗುಟ್ಟು” ವಿಶೇಷ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಪ್ರಶಾಂತ ಹೆಚ್. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜೆಇಇ, ನೀಟ್, ಕೆಸಿಇಟಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅಗತ್ಯವಾದ ಶಿಸ್ತು, ಸಮಯ ನಿರ್ವಹಣೆ, ಪಠ್ಯಕ್ರಮದ ಸಮಗ್ರ ಅಧ್ಯಯನ ಹಾಗೂ ನಿರಂತರ ಅಭ್ಯಾಸದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿರ್ಧರಿಸಿಕೊಂಡು ಯೋಜಿತ ರೀತಿಯಲ್ಲಿ ಅಧ್ಯಯನ ನಡೆಸಬೇಕು ಎಂದು ಕರೆ ನೀಡಿದರು.
ಗಣಿತ ವಿಷಯದ ಕುರಿತು ಪ್ರಶಾಂತ್ ಕೋಟ ವಿಶೇಷ ಉಪನ್ಯಾಸ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಗಳಿಸಲು ಅನುಸರಿಸಬೇಕಾದ ತಂತ್ರಗಳು, ಸಮಯ ಉಳಿತಾಯದ ವಿಧಾನಗಳು ಹಾಗೂ ಸಮಸ್ಯೆಗಳನ್ನು ಸುಲಭವಾಗಿ ಬಿಡಿಸುವ ಶಾರ್ಟ್ಕಟ್ ತಂತ್ರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಅನಂತಪದ್ಮನಾಭ ಅವರು ರಸಾಯನಶಾಸ್ತ್ರದ ಮಾರ್ಗದರ್ಶನ ನೀಡಿ, ಪಠ್ಯಕ್ರಮವನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸುವ ವಿಧಾನ, ಪ್ರಮುಖ ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುವ ಅಗತ್ಯತೆ ಹಾಗೂ ಪರೀಕ್ಷಾ ಸಿದ್ಧತೆಯ ಕಾರ್ಯತಂತ್ರಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಜ್ಞರಿಂದ ಅಮೂಲ್ಯ ಮಾಹಿತಿಯನ್ನು ಪಡೆದುಕೊಂಡರು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದ್ದು ವಿದ್ಯಾರ್ಥಿಗಳಲ್ಲಿ ಹೊಸ ಆತ್ಮವಿಶ್ವಾಸವನ್ನು ಮೂಡಿಸಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಿಭಾಗ ಮುಖ್ಯಸ್ಥ ವಿನಾಯಕ, ರಾಕೇಶ್, ಶುಭಾಲಕ್ಷ್ಮೀ ಉಪಸ್ಥಿತರಿದ್ದರು. ಗೀತಾ ಪ್ರಭು ನಿರೂಪಿಸಿ ಶುಭಾಲಕ್ಷ್ಮೀ ನಿರ್ವಹಿಸಿದರು.


