ಹೆಬ್ರಿ : ಎಸ್.ಆರ್. ಪಿ.ಯು. ಕಾಲೇಜು, ಹೆಬ್ರಿಯಲ್ಲಿ ಭೌತಶಾಸ್ತ್ರ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯನ್ನು ಉತ್ತೇಜಿಸುವ ಉದ್ದೇಶದಿಂದ “Wave–Particle Society” ಯನ್ನು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು.
ಅಧ್ಯಕ್ಷತೆಯನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್. ನಾಗರಾಜ್ ಶೆಟ್ಟಿ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ ವೈಜ್ಞಾನಿಕ ಸಂಶೋಧನೆ ಹಾಗೂ ನವೀನ ಆವಿಷ್ಕಾರಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮವನ್ನು ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್, ಉಡುಪಿಯ ನಿರ್ದೇಶಕರಾದ ಸಂತೆಕಟ್ಟೆ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ
ಮನೋಹರ್ ಉದ್ಘಾಟಿಸಿ ಭೌತಶಾಸ್ತ್ರದ ಅಧ್ಯಯನದಲ್ಲಿ ಕುತೂಹಲ, ಪ್ರಯೋಗಶೀಲತೆ ಹಾಗೂ ತಾರ್ಕಿಕ ಚಿಂತನೆಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳಲ್ಲಿ ಛಲ ಇರಬೇಕು, ವಿದ್ಯಾರ್ಥಿಗಳು ತಮಗಾಗಿ ಅಧ್ಯಯನ ಮಾಡಬೇಕೇ ವಿನಃ ಇತರರಿಗಾಗಿ ಅಲ್ಲ, ವಿದ್ಯಾರ್ಥಿಗಳು ವಿಜ್ಞಾನವನ್ನು ಮನಪೂರ್ವಕವಾಗಿ ಸ್ವೀಕರಿಸಿ ಅಧ್ಯಯನ ಮಾಡಿದರೆ ಯಶಸ್ಸು ಸಾಧ್ಯ ಎಂದು ಹೇಳಿದರು.
ಎಸ್.ಆರ್. ಪಬ್ಲಿಕ್ ಸ್ಕೂಲ್ ಸಹಾಯಕ ಶಿಕ್ಷಕ ಮಂಜುನಾಥ ಹೆಬ್ಬಾರ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ ಎಚ್. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಕ್ಷಯ್ ಭಟ್ ಅವರು “quantum physics” ವಿಷಯದ ಕುರಿತು ಪ್ರಾತ್ಯಕ್ಷಿಕೆ ಹಾಗೂ ವಿಚಾರ ಮಂಡನೆ ನಡೆಸಿದರು.
ಭೌತಶಾಸ್ತ್ರ ವಿಭಾಗದ ಪ್ರಶಾಂತ ಎಂ. ಮತ್ತು ಗೀತಾ ಪ್ರಭು ಕಾರ್ಯಕ್ರಮವನ್ನು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಐಶ್ವರ್ಯ ಶೆಟ್ಟಿ ನಿರೂಪಿಸಿ, ದೀಪ್ತಿ ಆಚಾರ್ಯ ವಂದಿಸಿದರು.


