ಹೆಬ್ರಿ: ಅಮೃತ ಭಾರತಿ ಟ್ರಸ್ಟ್ (ರಿ.) ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು, ಹೆಬ್ರಿ ಇದರ ವಿಜ್ಞಾನ ಸಂಘದ ವತಿಯಿಂದ “FUTURE IN FLASK – ರಸಾಯನಶಾಸ್ತ್ರದ ಮೂಲಕ ನಾಳೆಯ ಜಗತ್ತನ್ನು ವಿನ್ಯಾಸಗೊಳಿಸುವುದು” ಎಂಬ ಶೀರ್ಷಿಕೆಯ ವಿಶೇಷ ಉಪನ್ಯಾಸ ಕಾರ್ಯಕ್ರಮ ಶುಕ್ರವಾರ ಕಾಲೇಜಿನಲ್ಲಿ ನೆರವೇರಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ *ಡಾ. ನಿತಿನ್ ಕುಮಾರ್ ಎಸ್ ಶೆಟ್ಟಿ ಅವರು ಆಗಮಿಸಿ “ರಸಾಯನಶಾಸ್ತ್ರದ ಮೂಲಕ ನಾಳೆಯ ಜಗತ್ತನ್ನು ರೂಪಿಸುವುದು” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು.
ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ರಸಾಯನಶಾಸ್ತ್ರದ ಪಾತ್ರ, ಸಂಶೋಧನೆಗೆ ಇರುವ ಅವಕಾಶಗಳು, ಮತ್ತು ವಿದ್ಯಾರ್ಥಿಗಳು ಭವಿಷ್ಯದಲ್ಲಿ ಆಯ್ಕೆ ಮಾಡಬಹುದಾದ ವೃತ್ತಿ ಮಾರ್ಗಗಳ ಬಗ್ಗೆ ಅವರು ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಜೋಗಿ ವಹಿಸಿ, ಸಂಸ್ಥೆಯ ಪರವಾಗಿ ಗೌರವಿಸಿದರು. ಕಾರ್ಯಕ್ರಮದ ಸಂಯೋಜಕರಾದ ಡಾ. ಸುದರ್ಶನ್ ಶೆಟ್ಟಿ ಉಪಸ್ಥಿತರಿದ್ದರು.ಎಂ. ಎಸ್. ಸಫಾ ನಿರೂಪಿಸಿದರು. ಶ್ರಾವ್ಯ ಹೆಗಡೆ ಸ್ವಾಗತಿಸಿ, ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿದರು. ನಿಧಿ ಶೆಟ್ಟಿ ವಂದಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



