ಉನ್ನತ ಶಿಕ್ಷಣವು ಕೇವಲ ಪದವಿ ಗಳಿಸುವ ಸಾಧನ ಅಲ್ಲ : ಹೆಬ್ರಿ ದಿನೇಶ ಶೆಟ್ಟಿ.
ಹೆಬ್ರಿ : ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಓರಿಯೆಂಟೇಶನ್ ಅರ್ಥಪೂರ್ಣವಾಗಿ ನಡೆಯಿತು.
ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಚಾರ ಗ್ರಾಮ ಪಂಚಾಯಿತಿ ಪೂರ್ವಾಧ್ಯಕ್ಷ ಹೆಬ್ರಿ ದಿನೇಶ್ ಶೆಟ್ಟಿ ಹುತ್ತುರ್ಕೆ ಉದ್ಘಾಟಿಸಿ ಉನ್ನತ ಶಿಕ್ಷಣವು ಕೇವಲ ಪದವಿ ಗಳಿಸುವ ಸಾಧನವಾಗಿರದೆ, ವ್ಯಕ್ತಿತ್ವ ವಿಕಸನ, ಸಾಮಾಜಿಕ ಹೊಣೆಗಾರಿಕೆ, ನೈತಿಕ ಮೌಲ್ಯಗಳು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಶಕ್ತಿಯುತ ಅವಕಾಶವಾಗಿದೆ, ವಿದ್ಯಾರ್ಥಿಗಳು ಸಮಯದ ಮಹತ್ವವನ್ನು ಅರಿತು ಶಿಸ್ತು, ಪರಿಶ್ರಮ ಹಾಗೂ ನಿರಂತರ ಅಧ್ಯಯನದ ಮೂಲಕ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದರು.
ಅಧ್ಯಕ್ಷತೆಯನ್ನು ಕಾಲೇಜಿನ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್. ಕಾಲೇಜಿನ ಇತಿಹಾಸ, ಶೈಕ್ಷಣಿಕ ಸಾಧನೆಗಳು, ರಾಜ್ಯ ಶಿಕ್ಷಣ ನೀತಿ , ಪಠ್ಯಕ್ರಮ, ಪರೀಕ್ಷಾ ವಿಧಾನ, ಹಾಜರಾತಿ ನಿಯಮಗಳು, ವಿದ್ಯಾರ್ಥಿ ಕಲ್ಯಾಣ ಯೋಜನೆಗಳು ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ಕ್ರಾಸ್, ಪರಿಸರ ಸಂರಕ್ಷಣಾ ಚಟುವಟಿಕೆಗಳು ಹಾಗೂ ಇತರ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ವ್ಯಕ್ತಿತ್ವವನ್ನು ಸಮಗ್ರವಾಗಿ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಕಾಲೇಜಿನ ಶೈಕ್ಷಣಿಕ ವ್ಯವಸ್ಥೆ, ಗ್ರಂಥಾಲಯ, ವಿದ್ಯಾರ್ಥಿವೇತನ ಯೋಜನೆಗಳು, ಮಾರ್ಗದರ್ಶನ ಮತ್ತು ಸಮಾಲೋಚನಾ ವ್ಯವಸ್ಥೆ, ವೃತ್ತಿ ಮಾರ್ಗದರ್ಶನ, ಉದ್ಯೋಗಾವಕಾಶಗಳು ಹಾಗೂ ವಿವಿಧ ವಿದ್ಯಾರ್ಥಿ ಬೆಂಬಲ ಸೇವೆಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಸಂವಾದಾತ್ಮಕ ಅಧಿವೇಶನದಲ್ಲಿ ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.
ಪ್ರವೀಣ್ ಶೆಟ್ಟಿ ನಿರೂಪಿಸಿ ಸ್ವಾಗತಿಸಿದರು. ಡಾ. ಗಣೇಶ ಎಸ್ ವಂದಿಸಿದರು.


