ಬೆಂಗಳೂರು : ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳ ವೇಳೆ ನಾಯಕರು ಪಕ್ಷಾಂತರ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಂಘಟನಾ ಬದಲಾವಣೆಗೆ ಮುಂದಾಗಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ನೇರವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಹೈಕಮಾಂಡ್, ಆಯ್ಕೆ ಬಗ್ಗೆ ಅಂತಿಮ ತೀರ್ಮಾನವನ್ನು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ( ಸಂಘಟನೆ ) ಕೆ.ಸಿ.ವೇಣುಗೋಪಾಲ್ ಕೈಗೊಳ್ಳಲಿದ್ದಾರೆ.
ದೇಶವ್ಯಾಪಿ ನಡೆಯುತ್ತಿರುವ ‘ಸಂಘಟನ್ ಸೃಜನ ಅಭಿಯಾನ’ ಅಡಿಯಲ್ಲಿ ಎಐಸಿಸಿ ವೀಕ್ಷಕರು ಜಿಲ್ಲಾ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಹಾಗೂ ಮುಖಂಡರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಜಿಲ್ಲಾವಾರು ಸಿದ್ಧವಾಗುವ ವರದಿಯನ್ನು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸಲ್ಲಿಸಲಾಗುತ್ತದೆ ಎಂದು ಎಐಸಿಸಿ ವಕ್ತಾರರಾದ ಉಡುಪಿ ಜಿಲ್ಲೆಯ ವೀಕ್ಷಕ ಹಿಮ್ಮತ್ ಸಿಂಗ್ ತಿಳಿಸಿದ್ದಾರೆ.
ಅಭಿಯಾನ ದೇಶದಾದ್ಯಂತ ನಡೆಯುತ್ತಿದ್ದು, ಕರ್ನಾಟಕದಲ್ಲಿ ಆಗಸ್ಟ್ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಡಿಸಿಸಿ ಅಧ್ಯಕ್ಷರ ನೇಮಕದ ಕುರಿತು ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ. ವೇಣುಗೋಪಾಲ್ ಸೇರಿ ಕೈಗೊಳ್ಳಲಿದ್ದಾರೆ. ಉಡುಪಿ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯನ್ನು ಉಡುಪಿ ಜಿಲ್ಲೆಯ ವೀಕ್ಷಕ ಹಿಮ್ಮತ್ ಸಿಂಗ್ ನೇತ್ರತ್ವದಲ್ಲಿ ಮಾಡಿ ಮುಗಿಸಿದ್ದಾರೆ.
“ಡಿಸಿಸಿ ಅಧ್ಯಕ್ಷರಾಗಲು ಆಸಕ್ತರು ಸ್ವತಃ ಅರ್ಜಿ ಸಲ್ಲಿಸಿ.” : ಡಿ.ಕೆ.ಸುರೇಶ್
ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ನ ವೀಕ್ಷಕರಾಗಿರುವ ಚಾಂಡಿ ಉಮ್ಮನ್ ಅವರೊಂದಿಗೆ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಘಟನಾ ಸಭೆಗಳಲ್ಲಿ ಭಾಗವಹಿಸಿದ್ದ ಡಿ.ಕೆ. ಸುರೇಶ್, “ಡಿಸಿಸಿ ಅಧ್ಯಕ್ಷರಾಗಲು ಆಸಕ್ತಿ ಇರುವವರು ಸ್ವತಃ ಅರ್ಜಿ ಸಲ್ಲಿಸಬಹುದು. ಕೆಪಿಸಿಸಿ ಅಧ್ಯಕ್ಷರು ಅಥವಾ ಹಿರಿಯ ನಾಯಕರು ಯಾರ ಹೆಸರನ್ನೂ ಶಿಫಾರಸು ಮಾಡುವುದಿಲ್ಲ. ಆಸಕ್ತರು ನೇರವಾಗಿ ಅರ್ಜಿ ಸಲ್ಲಿಸಬೇಕು,” ಎಂದು ಸ್ಪಷ್ಟಪಡಿಸಿದರು.
ಬಳಿಕ ಮಾತನಾಡಿದ ಮಾಜಿ ಸಂಸದರಾದ ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್, “ಕಾಂಗ್ರೆಸ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಂಬುವ ಪಕ್ಷವಾಗಿದೆ. ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ದೇಶಾದಾದ್ಯಂತ ಡಿಸಿಸಿ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ರಾಹುಲ್ ಗಾಂಧಿ ಮುನ್ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.


