ಹೆಬ್ರಿ : ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಅಕ್ಷರ ಸಾಹಿತ್ಯ ಸಂಘ ಹಾಗೂ ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಶರಣ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ, ‘ವಚನ ಸಾಹಿತ್ಯ ಸಂಭ್ರಮ’ ಹಾಗೂ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮವು ಶನಿವಾರ ಶಾಲಾ ಸಭಾಂಗಣದಲ್ಲಿ ಜರುಗಿತು.
ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಿರಂಜನ ಚೋಳಯ್ಯ ಕಾರ್ಯಕ್ರಮ ಉದ್ಧಾಟಿಸಿ “ವಚನ ಸಾಹಿತ್ಯವು ಸಮಾಜಕ್ಕೆ ಸಮಾನತೆ, ಕಾಯಕ ನಿಷ್ಠೆ ಮತ್ತು ಮಾನವೀಯ ಮೌಲ್ಯಗಳನ್ನು ಬೋಧಿಸಿದ ಅಪೂರ್ವ ಸಾಹಿತ್ಯವಾಗಿದೆ. ಶರಣರ ವಿಚಾರಗಳು ಮತ್ತು ವಚನಗಳ ಸಂದೇಶಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ಹೇಳಿದರು.
“ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಹಾಗೂ ಸಾಂಸ್ಕೃತಿಕ ಮನೋಭಾವವನ್ನು ಬೆಳೆಸುವಲ್ಲಿ ಶಾಲೆಯ ಅಕ್ಷರ ಸಾಹಿತ್ಯ ಸಂಘ ಮತ್ತು ಶರಣ ಸಾಹಿತ್ಯ ಪರಿಷತ್ತಿನ ಶ್ರಮ ಶ್ಲಾಘನೀಯ. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಹೊರತರಬೇಕು” ಎಂದು ನಿರಂಜನ ಚೋಳಯ್ಯ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಸೀತಾನದಿ ವಿಜೇಂದ್ರ ಶೆಟ್ಟಿ ಅವರು ವಹಿಸಿದ್ದರು.ಉಡುಪಿ ಜಿಲ್ಲಾ ಕದಳಿ ವೇದಿಕೆಯ ಅಧ್ಯಕ್ಷರಾದ ಡಾ. ಗಿರಿಜಾ ಅತ್ತಿಗೇರಿ, ಹೆಬ್ರಿ ತಾಲ್ಲೂಕು ಕದಳಿ ವೇದಿಕೆಯ ಅಧ್ಯಕ್ಷೆ ಶಾರದಾ ವಿನಯ್ , ಉಪಪ್ರಾಂಶುಪಾಲ ದಿವಾಕರ ಮರಕಾಲ ಎಸ್., ಹಿರಿಯ ಶಿಕ್ಷಕ ವೆಂಕಟರಮಣ ಕಲ್ಕೂರ್,ಅಕ್ಷರ ಸಾಹಿತ್ಯ ಸಂಘದ ಸಂಚಾಲಕ ಮಂಜುನಾಥ ಕುಲಾಲ, ಅಕ್ಷರ ಸಾಹಿತ್ಯ ಸಂಘದ ಅಧ್ಯಕ್ಷೆ ಸಿಂಚನಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ವಚನ ಗಾಯನ,ಭಾಷಣ ಕಾರ್ಯಕ್ರಮಗಳು ನಡೆಯಿತು
ಅಕ್ಷರ ಸಾಹಿತ್ಯ ಸಂಘದ ಸಂಚಾಲಕ ಮಂಜುನಾಥ ಕುಲಾಲ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಮಾಜ ವಿಜ್ಞಾನ ಶಿಕ್ಷಕ ಪ್ರವೀಣ ಕುಮಾರ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿಯರಾದ ಸಾನಿಕಾ ಪೂಜಾರಿ, ಇಂಚನಾ, ಸಾನಿಕಾ ಹಾಗೂ ಮಾನ್ವಿತಾ ನಿರೂಪಿಸಿದರು.
ವಿಜೇತರ ಪಟ್ಟಿಯನ್ನು ಕನ್ನಡ ಭಾಷಾ ಶಿಕ್ಷಕಿ ಸಂಗೀತಾ ಶೆಟ್ಟಿ ವಾಚಿಸಿದರು. .


