ಮುನಿಯಾಲು : ಮುನಿಯಾಲಿನ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇದಿಕೆ ಉದ್ಘಾಟನೆ ಹಾಗೂ ಗುರುನಮನ ಮತ್ತು 2025-26 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ಹಾಗೂ ಸಂಸ್ಥೆಯಲ್ಲಿ ಗರಿಷ್ಠ ಅಂಕಗಳಿಸಿದ ಸುಮಾರು 60 ವಿದ್ಯಾರ್ಥಿಗಳು ಮತ್ತು ಎನ್ ಎಂ ಎಂ ಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ೮ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ಇತ್ತೀಚೆಗೆ ಮುನಿಯಾಲಿನ ಶ್ರೀ ಪದ್ಮಾವತಿ ಕಲ್ಯಾಣ ಮಂದಿರದಲ್ಲಿ ನಡೆಯಿತು.
ವಿವಿಧ ವಿಷಯಗಳಲ್ಲಿ ಪೂರ್ಣ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.
ಇದೇ ಸಂದರ್ಭದಲ್ಲಿ 2026-27ನೇ ಸಾಲಿನ ಶಾಲಾ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನೆಯನ್ನು ನೆರವೇರಿಸಲಾಯಿತು. ಸಂಸ್ಥೆಯಿಂದ ವರ್ಗಾವಣೆ ಗೊಂಡ ಪ್ರೌಢಶಾಲಾ ಶಿಕ್ಷಕರಾದ ಮಂಜುನಾಥ್ ಹಾಗೂ ಸುಧೀಂದ್ರ ಅವರನ್ನು ಸನ್ಮಾನಿಸಲಾಯಿತು. ಇದೇ ಮಾಸಾಂತ್ಯದಲ್ಲಿ ನಿವೃತ್ತಿಗೊಳ್ಳಲಿರುವ ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ ಅವರಿಗೂ ವಿಶೇಷ ಅಭಿನಂದನೆ ಸಲ್ಲಿಸಲಾಯಿತು. ವಿದ್ಯಾರ್ಥಿ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯನ್ನು ಶೃಂಗೇರಿ ಶಾರದಾ ದೇವಾಲಯದ ಆಡಳಿತ ಮಂಡಳಿಯ ಅಧಿಕಾರಿ ಸತೀಶ್ ಭಟ್ ಉದ್ಘಾಟಿಸಿ ವಿದ್ಯಾರ್ಥಿ ಸಾಧಕರನ್ನು ಹಾಗೂ ಅವರಿಗೆ ಮಾರ್ಗದರ್ಶನ ನೀಡಿದ ಗುರುವೃಂದವನ್ನು ಪ್ರಶಂಸಿಸಿ ಶಿಕ್ಷಣ ಪ್ರಸಾರದಲ್ಲಿ ಶೃಂಗೇರಿ ಶಾರದಾ ಪೀಠವು ನಡೆಸುತ್ತಿರುವ ಸೇವಾ ಕಾರ್ಯಗಳ ಮಾಹಿತಿ ನೀಡಿದರು.
ಮಂಗಳೂರು ಎಂಸಿಎಫ್ ಮಾರ್ಕೆಟಿಂಗ್ ವಿಭಾಗದ ಅಧಿಕಾರಿ ಕೀರ್ತನ್ ಕುಮಾರ್ ಗ್ರಾಮೀಣ ಪ್ರದೇಶದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಸಂತೋಷ ವ್ಯಕ್ತ ಪಡಿಸಿ ಸಂಸ್ಥೆಯ ವತಿಯಿಂದ ವಿದ್ಯಾಸಂಸ್ಥೆಗೆ ನೆರವನ್ನು ನೀಡುವ ಭರವಸೆ ನೀಡಿದರು. ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು ಮಾತನಾಡಿ ಕೆ ಪಿ ಎಸ್ ನ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ತಿಳಿಸಿದರು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ಹರೀಶ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಂಬೈ ಉದ್ಯಮಿಯಾದ ಸಂಸ್ಥೆಯ ಹಳೆ ವಿದ್ಯಾರ್ಥಿ ಗಿರೀಶ ಶೆಟ್ಟಿ ತೆಳ್ಳಾರು, ನಿವೃತ್ತ ಯೋಧ ಆನಂದ ಕಬ್ಬಿನಾಲೆ, ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಜಿ.ಸುಧಾಕರ್, ಕೆಪಿಎಸ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಶೆಟ್ಟಿ, ಪದವಿಪೂರ್ವ ವಿಭಾಗದ ವಿದ್ಯಾರ್ಥಿ ನಾಯಕ ಪ್ರಣೀತ್ ಶೆಟ್ಟಿಗಾರ್, ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಸಾಗರ್ ಶೆಟ್ಟಿ, ಪ್ರಾಥಮಿಕ ವಿಭಾಗದ ವಿದ್ಯಾರ್ಥಿ ನಾಯಕಿ ಸ್ತುತಿ ಆಚಾರ್ಯ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲೆ ಬೇಬಿ ಶೆಟ್ಟಿ ಕೆ ಸ್ವಾಗತಿಸಿದರು. ಉಪ ಪ್ರಾಂಶುಪಾಲ ರವೀಂದ್ರ ರಾವ್ ವಂದಿಸಿ ಶಿಕ್ಷಕ ಪ್ರಕಾಶ ಪೂಜಾರಿ ನಿರೂಪಿಸಿದರು.


