ಕರ್ನಾಟಕ ಸಾಹಿತ್ಯ ಅಕಾಡೆಮಿಯ ಉಡುಪಿ ಜಿಲ್ಲೆಯ ಚಕೋರ ಸಾಹಿತ್ಯ ವಿಚಾರ ವೇದಿಕೆ
ಕುಕ್ಕುಜೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭಾಷಾ ಕಲಿಕೆಯ ಸವಾಲುಗಳು – ವಿಶೇಷ ಉಪನ್ಯಾಸ
ಕುಕ್ಕುಜೆ: ಬಹುಭಾಷಿಕತೆ ಮತ್ತು ಬಹು ಸಂಸ್ಕೃತಿಯೇ ಭಾರತದ ವಿಶೇಷತೆ. ಬಹುಭಾಷೆಗಳನ್ನು ಕಲಿಯುವ ಈ ಪರಿಸರದಲ್ಲಿ ಭಾಷಾ ಕಲಿಕೆಯನ್ನು ಕಟ್ಟಿಕೊಳ್ಳುವ ಅವಶ್ಯಕತೆ ಇದೆ ಎಂದು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕಿ ನಿಶ್ಚಿತ ಎಸ್. ಹೋಬಳಿದಾರ್ ಹೇಳಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಉಡುಪಿ ಜಿಲ್ಲೆಯ ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ಕುಕ್ಕುಜೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಭಾಷಾ ಕಲಿಕೆಯ ಸವಾಲುಗಳು ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಪ್ರಾಸ್ತಾವಿಕವಾಗಿ ಮಾತನಾಡಿ, ಅಕಾಡೆಮಿಯು ಜನರ ನಡುವೆ ಭಾರತ ಸಂವಿಧಾನದ ತತ್ವಗಳನ್ನು, ಗಾಂಧಿ ಮತ್ತು ಅಂಬೇಡ್ಕರ್ ಚಿಂತನೆಯನ್ನು ಪಸರಿಸುವ ಸಲುವಾಗಿ ಚಕೋರದಂತಹ ವೇದಿಕೆಗಳನ್ನು ಜಿಲ್ಲಾ ಮಟ್ಟದಲ್ಲಿ ಕ್ರಿಯಾಶೀಲವಾಗಿಟ್ಟುಕೊಂಡಿದೆ.
ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ತಲುಪುವ ಮೂಲಕ ಈ ವೇದಿಕೆಯು ಅತ್ಯಂತ ಕ್ರಿಯಾಶೀಲವಾಗಿ ಜನಮನಕ್ಕೆ ಬೇಕಾದಂತಹ ಪ್ರಜಾಸತ್ತಾತ್ಮಕ ವಿವೇಕವನ್ನು ತುಂಬುತ್ತಿದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕುಕ್ಕುಜೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೇಷ್ಮಾ ರಾಣಿ ಮಾತನಾಡಿ, ಗಾಂಧಿ ಮೌಲ್ಯಗಳನ್ನು ಯುವ ಸಮುದಾಯ ಅಳವಡಿಸಿಕೊಳ್ಳುವ ಅಗತ್ಯವನ್ನು ಪ್ರತಿಪಾದಿಸುವ ಇಂತಹ ವೇದಿಕೆಗಳ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಭಾಷಾ ಕಲಿಕೆಯ ಸವಾಲುಗಳನ್ನು ಅರ್ಥ ಮಾಡಿಕೊಂಡು ಆ ಮೂಲಕ ನಮ್ಮ ಅಭಿವ್ಯಕ್ತಿ ಸಾಮರ್ಥ್ಯವನ್ನು ಎತ್ತರಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚಕೋರ ಜಿಲ್ಲಾ ಸಂಚಾಲಕಿ ಶಾಲಿನಿ ಯು.ಬಿ., ರಾಮಾಂಜಿ ನಮ್ಮಭೂಮಿ ಹಾಗೂ ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.
ಸಮಾಜಶಾಸ್ತ್ರ ಉಪನ್ಯಾಸಕ ರಮೇಶ್ ನಾಯ್ಕ ಸ್ವಾಗತಿಸಿ, ನಿರೂಪಿಸಿದರು. ಕನ್ನಡ ಉಪನ್ಯಾಸಕ ಶಬರೀಶ್ ವಂದಿಸಿದರು.


