ಹೆಬ್ರಿ : ಮರ ಬಿದ್ದು ಮೃತಪಟ್ಟ ಸದಾನಂದ ಪ್ರಭು ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮತ್ತು ಹೆಬ್ರಿ ತಹಶೀಲ್ಧಾರ್ ಅವರಿಗೆ ಮಂಗಳವಾರ ಸಾಮಾಜಿಕ ಹೋರಾಟಗಾರ ಶ್ರೀಕಾಂತ್ ಕುಚ್ಚೂರು ಮನವಿ ಸಲ್ಲಿಸಿದರು.
ಹೆಬ್ರಿ ಭಾಗದಲ್ಲಿ ಸಾರ್ವಜನಿಕ ಸ್ಥಳಗಳು, ರಸ್ತೆಗಳು ಹಾಗೂ ಮನೆಗಳಿಗೆ ಅಪಾಯಕಾರಿಯಾಗಿರುವ ಮರಗಳನ್ನು ತಕ್ಷಣ ತೆರವುಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ. ರಸ್ತೆ ಬದಿಯಲ್ಲಿ ನೀರಿನ ಪೈಪ್, ಕೇಬಲ್ ಸೇರಿದಂತೆ ವಿವಿಧ ಕಾಮಗಾರಿಗಳಿಗಾಗಿ ನಿರಂತರವಾಗಿ ಜೇಸಿಬಿ ಮೂಲಕ ಆಳವಾಗಿ ಹೊಂಡಗಳನ್ನು ತೆಗೆಯಲಾಗುತ್ತಿದೆ. ಇದರಿಂದ ಮರಗಳ ಬುಡದಲ್ಲಿರುವ ಬೇರುಗಳು ಸಡಿಲಗೊಂಡು, ಹಸಿ ಮರಗಳೂ ಸಹ ಗಾಳಿಮಳೆಗೆ ಉರುಳಿ ಬೀಳುವ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ಶ್ರೀಕಾಂತ್ ಕುಚ್ಚೂರು ತಿಳಿಸಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗಳ ನಿರ್ಲಕ್ಷ್ಯದಿಂದ ಒಣಮರಗಳಷ್ಟೇ ಅಲ್ಲದೆ, ಜೀವ ಇರುವ ಮರಗಳೂ ಸಹ ಬೀಳುವ ಸ್ಥಿತಿಯಲ್ಲಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ಅಪಾಯಕಾರಿ ಮರಗಳನ್ನು ಗುರುತಿಸಿ ತೆರವುಗೊಳಿಸಬೇಕು. ಆ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಬಹುದಾಗಿದೆ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.



